ಬೆಂಗಳೂರು, ಏಪ್ರಿಲ್ 23: ರಾಜ್ಯದಲ್ಲಿ ಬಿಸಿಲ ಧಗೆ ಜನರನ್ನು ಹೈರಾಣಾಗಿಸಿದೆ. ಬಿಸಿಲಿನ ಜೊತೆಗೆ ಸಂಜೆ ಹುಯ್ಯುವ ಮಳೆ ತಂಪನ್ನು ನೀಡಿದರೂ, ತಾಪಮಾನ ಮಾತ್ರ ಕಡಿಮೆಯಾಗುವುದಿಲ್ಲ. ಬಿಸಿಲಿನ ಶಾಖಕ್ಕೆ ಜನರು ರಸ್ತೆಯಲ್ಲಿ ಓಡಾಡಲು ಹಿಂಜರಿಯುತ್ತಿದ್ದಾರೆ. ಮಧ್ಯಾಹ್ನದ ಸಮಯದಲ್ಲಿ ರಸ್ತೆಗಳು ಬಿಕೋ ಎನ್ನುತ್ತಿದ್ದು, ಕಾದ ಕೆಂಡದಂತಾಗಿರುತ್ತವೆ. ಈ ನಡುವೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಆಘಾತಕಾರಿ ಮಾಹಿತಿಯೊಂದು ನೀಡಿದೆ. ಮುಂದಿನ ಐದು ದಿನಗಳವರೆಗೆ ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಜನರು ಮುನ್ನೆಚ್ಚರಿಕೆ ವಹಸುವಂತೆ ಮನವಿ ಮಾಡಿದೆ. ಈಗಾಗಲೇ ಕರಾವಳಿ, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಉಷ್ಣ ಅಲೆ ಕಂಡು ಬರುತ್ತಿದೆ. ಬೆಳಗ್ಗೆ 9 ಗಂಟೆಯಿಂದಲೇ ತೀವ್ರ ಶಾಖದ ಅನುಭವಾಗುತ್ತಿದೆ. ಹೀಗಿರುವಾಗ, ತಾಪಮಾನ ಇನ್ನಷ್ಟು ಹೆಚ್ಚಾಗುವ ಮುನ್ಸೂಚನೆ ಜನರಲ್ಲಿ ಭೀತಿ ಮೂಡಿಸಿದೆ. ಇನ್ನು, ಮುಂದಿನ ಐದು ದಿನಗಳವರೆಗೆ ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ತೇವಾಂಶ ಪರಿಸ್ಥಿತಿಗಳು ಹೆಚ್ಚಾಗಿರೋ ಸಾಧ್ಯತೆಯಿದೆ. ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ. 42 ° C ದಾಖಲಾಗಿದ್ದೆಲ್ಲಿ? ಕೊಪ್ಪಳದಲ್ಲಿ ಗರಿಷ್ಠ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಉಳಿದಂತೆ ರಾಯಚೂರಿನಲ್ಲಿ 40 ಡಿಗ್ರಿ ಸೆಲ್ಸಿಯಸ್, ಬಳ್ಳಾರಿ 39 ಡಿಗ್ರಿ ಸೆಲ್ಸಿಯಸ್, ಕಲಬುರಗಿ 39 ಡಿಗ್ರಿ ಸೆಲ್ಸಿಯಸ್, ಬೀದರ್ 39 ಡಿಗ್ರಿ ಸೆಲ್ಸಿಯಸ್, ವಿಜಯಪುರ 39 ಡಿಗ್ರಿ ಸೆಲ್ಸಿಯಸ್, ಗದಗ 39 ಡಿಗ್ರಿ ಸೆಲ್ಸಿಯಸ್, ಗಂಗಾವತಿ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.ಮತ್ತುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Post navigation ಪ್ರಯಾಣಿಕರಿಗೆ ಸಿಹಿ ಸುದ್ದಿ: ಈ ದಿನ ನಮ್ಮ ಮೆಟ್ರೋ ನಸುಕಿನ 3:30ಕ್ಕೆ ಆರಂಭ ಉತ್ತರ ಕರ್ನಾಟಕದ ಈ ಜಿಲ್ಲೆಗಳಲ್ಲಿ ಏ.25 ರಂದು ಆಲಿಕಲ್ಲು ಮಳೆ: ರೈತರಿಗೆ ಸಂಕಷ್ಟ